ಬುಡಾ ಅಧ್ಯಕ್ಷರಾಗಿ ಶಾಸಕ ಆಸೀಫ್ ಸೇಠ್ ಅಧಿಕಾರ ಸ್ವೀಕಾರ..
ಕಣಬರ್ಗಿ ಲೇಔಟ್ ಅಭಿವೃದ್ಧಿಗೆ ಕ್ರಮದ ಭರವಸೆ..
ಬೆಳಗಾವಿ : ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕಣಬರ್ಗಿ ವಸತಿ ವಿನ್ಯಾಸ ಸೇರಿದಂತೆ ಹಲವು ವಿಷಯಗಳಿಗೆ ಮೊದಲ ಆದ್ಯತೆ ನೀಡುವುದಾಗಿ ಉತ್ತರ ಮತಕ್ಷೇತ್ರದ ಶಾಸಕ, ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆಸೀಫ್ (ರಾಜು) ಸೇಠ್ ತಿಳಿಸಿದರು.
ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಣಬರ್ಗಿ ಲೇಔಟ್ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುವುದರ ಜೊತೆಗೆ ಐಟಿ ಪಾರ್ಕ್ ನಿರ್ಮಿಸಲು ಕ್ರಮ ವಹಿಸಲಾಗುವುದು ಎಂದರು.
ಅಲ್ಲದೇ, ನಗರದಲ್ಲಿ ತಲೆ ಎತ್ತುತ್ತಿರುವ ಅನಧಿಕೃತ ಲೇಔಟ್ ಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು.

ಕಾನೂನುಬಾಹಿರವಾಗಿ ನಿರ್ಮಾಣಗೊಳ್ಳುತ್ತಿರುವ ಅನಧಿಕೃತ ಲೇಔಟ್ ಗಳ ವಿರುದ್ಧ ಸಾರ್ವಜನಿಕ ಹಿತದೃಷ್ಟಿಯಿಂದಲೂ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ಹೇಳಿದರು.
ಸಹಜವಾಗಿಯೇ ನಾನೂ ಕೂಡ ಅಲ್ಪಸಂಖ್ಯಾತರ ಕೋಟಾದಡಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ಧೆ. ಆದರೆ, ಈಗ ಬುಡಾ ಅಧ್ಯಕ್ಷ ಸ್ಥಾನ ಲಭಿಸಿದೆ. ಇದಕ್ಕಾಗಿ ಪಕ್ಷದ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸುತ್ತೇನೆ.
ನಗರದ ಅಭಿವೃದ್ಧಿಗೆ ಎಲ್ಲರೂ ಸೇರಿಕೊಂಡು ಕೆಲಸ ಮಾಡೋಣ ಎಂದು ಆಸೀಫ್ ಸೇಠ್ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್,
ಮಾಜಿ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಮಾಜಿ ಶಾಸಕ ಫಿರೋಜ್ ಸೇಠ್, ಬುಡಾ ಆಯುಕ್ತರು ಸೇರಿದಂತೆ ಅನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.