ಅರಭಾವಿ ಕ್ಷೇತ್ರದ ಶಾಸಕರ ಅವಿರೋಧ ಆಯ್ಕೆ..

ಅರಭಾವಿ ಕ್ಷೇತ್ರದ ಶಾಸಕರ ಅವಿರೋಧ ಆಯ್ಕೆ..

ಜಿಲ್ಲಾ ಹಾಲು ಒಕ್ಕೂಟ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ..

ಬೆಳಗಾವಿ : ಬೆಳಗಾವಿ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೂತನ ಅಧ್ಯಕ್ಷರಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ನಿರ್ದೇಶಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾದರು.

ಸೋಮವಾರ ನಗರದ ಜಿಲ್ಲಾ ಹಾಲು ಒಕ್ಕೂಟದ ಸಭಾಗೃಹದಲ್ಲಿ ನಡೆದ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಬಾಲಚಂದ್ರ ಜಾರಕಿಹೊಳಿ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಅಧಿಕಾರ ಸ್ವೀಕರಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ಹಿಂದಿನ ಅಧ್ಯಕ್ಷ ವಿವೇಕರಾವ ಪಾಟೀಲ ಮತ್ತು ಒಕ್ಕೂಟದ ಸದಸ್ಯರು ಸರ್ವಾನುಮತದಿಂದ ಆಯ್ಕೆ ನನ್ನನ್ನು ಮಾಡಿದ್ದಾರೆ. ಅದಕ್ಕಾಗಿ ಎಲ್ಲ ಸದಸ್ಯರಿಗೆ ಆಭಾರಿ, ಸರ್ಕಾರವು ಸಹಕಾರಿ ಇಲಾಖೆಯಲ್ಲಿ ತಿದ್ದುಪಡಿಯನ್ನು ತರಲು ಉತ್ಸುಕವಾಗಿದೆ. ಈಗಾಗಲೇ ರಾಜ್ಯ ಮಟ್ಟದ ಸಹಕಾರಿ ಮಹಾಮಂಡಳಿಗೆ ಹೋಗ ಬಯಸುವವರು ಮೊದಲಿಗೆ ಜಿಲ್ಲಾ ಒಕ್ಕೂಟಕ್ಕೆ ಅಧ್ಯಕ್ಷರಾಗಬೇಕು.

ಅಧ್ಯಕ್ಷರಾದವರು ಮಹಾಮಂಡಳಿಗೆ ನಿರ್ದೇಶಕರಾಗಬೇಕೆನ್ನುವ ಹೊಸ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಈ ಹೊಸ ಕಾಯ್ದೆಯು ವಿಧಾನ ಪರಿಷತ್ತಿನಲ್ಲಿ ಸೋಲಾಗಿದ್ದು, ವಿಧಾನ ಸಭೆಯಲ್ಲಿ ಅಂಗೀಕಾರವಾಗಿದೆ.

ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಸಹಕಾರಿ ಇಲಾಖೆಯ ಹೊಸ ನಿಯಮ ಜಾರಿಯಾಗುವುದರಿಂದ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ನಾನು ಅಧ್ಯಕ್ಷ ಆಗಬೇಕಾಯಿತು ಎಂದರು.

ಹಿಂದಿನ ಅವಧಿಯ ಅಧ್ಯಕ್ಷರಾಗಿ ವಿವೇಕರಾವ್ ಪಾಟೀಲ ಅವರು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ, ಆದರೆ ಕೆಎಂಎಫ್ ಆಡಳಿತ ಮಂಡಳಿಯ ಚುಕ್ಕಾಣಿಯನ್ನು ಮತ್ತೊಮ್ಮೆ ಹಿಡಿಯಬೇಕಾಗಿದ್ದರಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಬೇಕಾಯಿತು. ಮುಂದಿನ ದಿನಗಳಲ್ಲಿ ಯಾವುದೇ ಗೊಂದಲಗಳು ನಡೆಯಬಾರದು.

ಈ ಹಿನ್ನೆಲೆಯಲ್ಲಿ ವಿವೇಕರಾವ್‌ ಅವರೊಂದಿಗೆ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಯಿತು ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದರು.

ರಾಯಬಾಗ, ಗೋಕಾಕ, ಮೂಡಲಗಿ ತಾಲೂಕಿನ ರೈತರು ಹೆಚ್ಚಿನ ಪ್ರಮಾಣದಲ್ಲಿ ಹಾಲನ್ನು ಪೂರೈಸುತ್ತಿದ್ದಾರೆ. ಆದರೆ, ನಿಪ್ಪಾಣಿ, ಕಾಗವಾಡ, ಚಿಕ್ಕೋಡಿ, ಅಥಣಿ ತಾಲೂಕಿನ ರೈತರು ಮಾತ್ರ ನೆರೆಯ ಮಹಾರಾಷ್ಟ್ರಕ್ಕೆ ಹಾಲನ್ನು ಪೂರೈಕೆ ಮಾಡುತ್ತಿದ್ದಾರೆ. ಬೈಲಹೊಂಗಲ ರೈತರು ಕಡಿಮೆ ಪ್ರಮಾಣದಲ್ಲಿ ಹಾಲು ಪೂರೈಸುತ್ತಿದ್ದಾರೆ. ಇದಕ್ಕೆ ಕಾರಣ ರೈತರು ಹೈನುಗಾರಿಕೆಗೆ ಅಷ್ಟಾಗಿ ಒತ್ತು ಕೊಡುತ್ತಿಲ್ಲ.

ನೀರಿನ ಸಮಸ್ಯೆಯನ್ನು ಮುಂದೆ ಮಾಡುತ್ತಿದ್ದಾರೆ, ಕೋಲಾರ ಜಿಲ್ಲೆಯಲ್ಲಿ ನೀರಿನ ಅಭಾವ ಕಂಡು ಬಂದರೂ ಅಲ್ಲಿನ ರೈತರು ಹೈನುಗಾರಿಕೆಗೆ ಆದ್ಯತೆ ನೀಡುತ್ತಿದ್ದಾರೆ. ನಮ್ಮ ಉತ್ತರ ಕರ್ನಾಟಕದ ಭಾಗದಲ್ಲಿಯೂ ರೈತರು ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ಮೂಲಕ ಹೈನುಗಾರಿಕೆ ವೃದ್ಧಿಯಾದರೆ, ಇಡೀ ರೈತರ ಬದುಕು ಹಸನಾಗಲು ಸಾಧ್ಯವಾಗುತ್ತದೆ. ಈ ದಿಸೆಯಲ್ಲಿ ಹೈನು ಕ್ರಾಂತಿಯಾಗಬೇಕಿದೆ ಎಂದ ಬಾಲಚಂದ್ರ ಜಾರಕಿಹೊಳಿ, ನಮ್ಮ ಜಿಲ್ಲೆಯಿಂದ ಪಕ್ಕದ ಮಹಾರಾಷ್ಟ್ರಕ್ಕೆ ಹೋಗುತ್ತಿರುವ 15 ಲಕ್ಷ ಲೀಟರ್ ಹಾಲಯಲು ನಮ್ಮಲ್ಲಿಯೇ ಉಳಿಸಿಕೊಳ್ಳಬೇಕಾಗಿದೆ ಎಂದರು..

ಜಿಲ್ಲಾ ಸಹಕಾರಿ ಹಾಲು ಒಕ್ಕೂಟದ ಪ್ರಗತಿಗಾಗಿ ಆಡಳಿತ ಮಂಡಳಿಯ ಸದಸ್ಯರು, ಹೈನಗಾರರು ಮತ್ತು ಸಿಬ್ಬಂದಿಗಳು ಒಗ್ಗಟ್ಟಾಗಿ ಶ್ರಮಿಸಿದರೇ ಖಂಡಿತವಾಗಿಯೂ ನಮ್ಮ ಒಕ್ಕೂಟಗಳು ಆರ್ಥಿಕವಾಗಿ ಬೆಳೆಯಲು ಸಾಧ್ಯವಾಗುತ್ತವೆ ಎಂದ ಅವರು,

ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಂಸ್ಕರಿಸಿ ತಯಾರಿಸಲು ಹೊಸ ತಂತ್ರಜ್ಞಾನವುಳ್ಳ ಸಂಪೂರ್ಣ ಸ್ವಯಂಚಾಲಿತ ಮೆಗಾ ಡೈರಿಯನ್ನು ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿದೆ. ಹೈನುಗಾರ ರೈತರಿಗೆ ಮುಂದಿನ ದಿನಗಳಲ್ಲಿ ಸಮರ್ಪಕವಾಗಿ ಬಿಲ್‌ ಪಾವತಿ ಮಾಡಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಬಾಲಚಂದ್ರ ಜಾರಕಿಹೊಳಿ ಭರವಸೆ ನೀಡಿದರು.

ಈ ವೇಳೆ ನಿರ್ದೇಶಕರಾದ ವಿವೇಕರಾವ್‌ ಪಾಟೀಲ ಬಾಬು ಕಟ್ಟಿ, ಮಲ್ಲಪ್ಪ ಪಾಟೀಲ, ಕಲ್ಲಪ್ಪ ಗಿರೆನ್ನವರ, ಡಾ. ಬಸವರಾಜ ಪರನ್ನವರ, ಬಾಬುರಾವ ವಾಘಮೋಡೆ, ವೀರುಪಾಕ್ಷಿ ಈಟಿ, ರಾಯಪ್ಪ ಡೂಗ, ಪ್ರಕಾಶ ಅಂಬೋಜಿ, ಸಂಜಯ ಶಿಂತ್ರಿ, ಸತ್ತೆಪ್ಪ ವಾರಿ, ಶಂಕರ್ ಸಿನ್ನಾಳ, ಮಹಾದೇವ ಬಿಳಿಕುರಿ, ರಮೇಶ್ ಅಣ್ಣಿಗೇರಿ, ಸವಿತಾ ಖಾನಪ್ಪಗೋಳ, ವ್ಯವಸ್ಥಾಪಕ ನಿರ್ದೇಶಕ ಎಂ. ಕೃಷ್ಣಪ್ಪ ಸೇರಿ ಮತ್ತಿತರರು ಇದ್ದರು. ರಾಣಿ ಚೆನ್ನಮ್ಮ ವಿವಿ ರಜಿಸ್ಟ‌ರ್ ರಾಜಶ್ರೀ ಜೈನಾಪುರ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು..

ವರದಿ ಪ್ರಕಾಶ ಕುರಗುಂದ.