ಕಿತ್ತೂರು ವಿಜಯೋತ್ಸವ ಜ್ಯೋತಿಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ…

ಕಿತ್ತೂರು ವಿಜಯೋತ್ಸವ ಜ್ಯೋತಿಗೆ ಸಿಎಂ ಸಿದ್ದರಾಮಯ್ಯರಿಂದ ಚಾಲನೆ..

ಸ್ವಾಭಿಮಾನ-ನಾಡಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ: ಸಿಎಂ ಸಿದ್ದರಾಮಯ್ಯ..

ಬೆಂಗಳೂರು : ಅ 2:
ಸ್ವಾಭಿಮಾನ-ನಾಡಭಕ್ತಿ, ದೇಶಭಕ್ತಿಗೆ ಮತ್ತೊಂದು ಹೆಸರು ರಾಣಿ ಚನ್ನಮ್ಮ ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

ವಿಧಾನಸೌಧ ಮುಂದಿನ ಮೆಟ್ಟಿಲುಗಳ ಬಳಿ “ಕಿತ್ತೂರು ವಿಜಯೋತ್ಸವದ ಜ್ಯೋತಿ” ಗೆ ಚಾಲನೆ ನೀಡಿ ಮಾತನಾಡಿದರು. ಇಲ್ಲಿಂದ ಹೊರಟ ಜ್ಯೋತಿ ಎಲ್ಲಾ ಜಿಲ್ಲೆಗಳನ್ನು ಹಾದು ಕಿತ್ತೂರು ತಲುಪಲಿದೆ.

ಬ್ರಿಟಿಷರ ವಿರುದ್ಧ ನೇರ ಸವಾಲೊಡ್ಡಿದ ದಿಟ್ಟ ಮಹಿಳೆ. ಸಂಗೊಳ್ಳಿ ರಾಯಣ್ಣ ಕೂಡ ರಾಣಿ ಚನ್ನಮ್ಮ ಅವರ ಸೈನ್ಯದಲ್ಲಿದ್ದರು. ಬ್ರಿಟೀಷರಿಗೆ ತೆರಿಗೆ ಕೊಡಲು ವಿರೋಧಿಸಿ ವಿರೋಚಿತವಾಗಿ ಹೋರಾಡಿದ ದೇಶಪ್ರೇಮಿಗಳು ಇವರು ಎಂದರು.

ನಾಡಪ್ರೇಮ, ದೇಶಪ್ರೇಮ, ಸ್ವಾಭಿಮಾನಕ್ಕೆ ಮತ್ತೊಂದು ಹೆಸರು ರಾಣಿ ಚನ್ನಮ್ಮ. ಕಿತ್ತೂರಿನಲ್ಲಿ ಆಚರಿಸಲ್ಪಡುತ್ತಿರುವ ಕಿತ್ತೂರು ಉತ್ಸವಕ್ಕೆ ಮತ್ತು ಕಿತ್ತೂರಿನ‌ ಅಭಿವೃದ್ಧಿಗೆ ಸರ್ಕಾರ ಸಕಲ ನೆರವನ್ನು ನೀಡುತ್ತಿದೆ. ಅಗತ್ಯ ಅನುದಾನವನ್ನೂ ನೀಡುತ್ತಿದೆ.

ಇಂದು ಮಹಾತ್ಮ ಗಾಂಧಿಯವರ ಜಯಂತಿ. ಜೊತೆಗೆ ಲಾಲ್ ಬಹದ್ದೂರು ಶಾಸ್ತ್ರಿ ಅವರ ಜನುಮದಿನವೂ ಹೌದು. ಗಾಂಧಿ ನಡಿಗೆ ಮೂಲಕ ಗಾಂಧಿ ತತ್ವಾದರ್ಶಗಳು ಇವತ್ತಿನ ಯುವ ಪೀಳಿಗೆಗೆ ತಲುಪಿಸುವ ಪ್ರಯತ್ನ ಮಾಡಿದ್ದೇವೆ ಎಂದರು.

ಗಾಂಧೀಜಿಯವರು ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ನೇತೃತ್ವ ವಹಿಸಿ ಶಾಂತಿಯುತವಾಗಿ ಸ್ವಾತಂತ್ರ್ಯ ದೊರಕಿಸಿಕೊಟ್ಟರು. 1920 ರಿಂದ 1947 ರ ವರೆಗಿನ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದರು ಎಂದು ವಿವರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ‌ಶಿವಕುಮಾರ್, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಎಚ್.ಕೆ.ಪಾಟೀಲ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್, ಸಚಿವರಾದ ಪ್ರಿಯಾಂಕ್ ಖರ್ಗೆ, ಕಿತ್ತೂರು ಶಾಸಕರಾದ ಬಾಬಾಸಾಹೇಬ್ ಪಾಟೀಲ, ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಪ್ರಭಾವತಿ ಫಕ್ಕೀರಪೂರ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕಿತ್ತೂರು ಉತ್ಸವದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಜ್ಯೋತಿಯಾತ್ರೆಯು ಅಕ್ಟೋಬರ್ 23 ರಂದು ಚನ್ನಮ್ಮನ ಕಿತ್ತೂರು ತಲುಪಲಿದೆ.